ಕಾರವಾರ: ಸಾರ್ವಜನಿಕ ಸ್ಥಳದಲ್ಲೇ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ ತೇಲಾಡುತ್ತಾ, ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವ್ಯಕ್ತಿಯನ್ನು ಚಿತ್ತಾಕುಲಾ ಪೊಲೀಸರು ಬಂಧಿಸಿ, ಆತನ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಘಟನೆ ಕಾರವಾರ ತಾಲೂಕಿನ ಸದಾಶಿವಗಡದಲ್ಲಿ ನಡೆದಿದೆ.
ಬಂಧಿತನನ್ನು ನಗರದ ಕೆ.ಎಚ್.ಬಿ. ನಿವಾಸಿ ಪ್ರದೀಪ್ ಸಿ.ಎಸ್. ಪೂಜಾರ್ ಎಂದು ಗುರುತಿಸಲಾಗಿದೆ. ಈತ ಸದಾಶಿವಗಡದ ಲೋಟಸ್ ಹೋಟೆಲ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಪರೀಕ್ಷೆಯಲ್ಲಿ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ವೈದ್ಯಾಧಿಕಾರಿಗಳ ವರದಿಯಲ್ಲಿ ಟೆಟ್ರಾಹೈಡ್ರೋಕಾನ್ನಬಿನಾಲ್ (THC) ಪರೀಕ್ಷೆಯ ಫಲಿತಾಂಶ ಪಾಸಿಟಿವ್ ಬಂದಿದೆ ಎಂದು ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಎನ್ಡಿಪಿಎಸ್ ಕಾಯ್ದೆಯ ಕಲಂ 27(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಚಿತ್ತಾಕುಲಾ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಅಮಲಿನಲ್ಲಿ ತೇಲಾಡಿ ಜನರಿಗೆ ಕಿರಿಕ್; ಗಾಂಜಾ ಸೇವಿಸಿದ್ದ ವ್ಯಕ್ತಿ ಪೊಲೀಸರ ವಶಕ್ಕೆ!
