ಕಾರವಾರ:ಮಳೆಗಾಲದ ನಡುವೆಯೇ ಉತ್ತರ ಕನ್ನಡ ಜಿಲ್ಲೆಯಲ್ಲಿ ತೀವ್ರ ಬಿಸಿಲು ಮತ್ತು ಹೆಚ್ಚಿನ ತೇವಾಂಶದ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಗಾಳಿಯ ಪರಿಣಾಮ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಸಾಮಾನ್ಯವಾಗಿ ಜುಲೈ ತಿಂಗಳಲ್ಲಿ ಧಾರಾಕಾರ ಮಳೆಯಾಗುವ ಉತ್ತರ ಕನ್ನಡದಲ್ಲಿ ಈ ಬಾರಿ ಮಳೆಯ ಕೊರತೆ ಕಂಡುಬಂದಿದ್ದು, ತಾಪಮಾನವೂ ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಹೆಚ್ಚಿನ ತೇವಾಂಶದಿಂದ ಹಗಲು ಮಾತ್ರವಲ್ಲ, ರಾತ್ರಿಯಲ್ಲಿಯೂ ಅಸಹನೀಯ ಸೆಖೆ ಅನುಭವವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮಧ್ಯಾಹ್ನದ ವೇಳೆ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಸಾಕಷ್ಟು ನೀರು, ಮಜ್ಜಿಗೆ ಹಾಗೂ ಇತರ ದ್ರವ ಪದಾರ್ಥಗಳನ್ನು ಸೇವಿಸಿ, ಹಗುರವಾದ ಬಟ್ಟೆ ಧರಿಸುವ ಮೂಲಕ ಬಿಸಿಗಾಳಿಯಿಂದ ರಕ್ಷಿಸಿಕೊಳ್ಳುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ಕಳೆದ ಒಂದು ವಾರದ ಅವಧಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸಂಪೂರ್ಣವಾಗಿ ನಿಂತಿದೆ. ಇದರಿಂದ ಮುಂದಿನ ದಿನದಲ್ಲಿ ಜನ ಇನ್ನಷ್ಟು ತೊಂದರೆ ಅನುಭವಿಸುವ ಸಾಧ್ಯತೆ ಇದೆ.
