ಕಾರವಾರ:ನಗರದ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್ಒ) ಕಚೇರಿ ಸಮೀಪ ಗುರುವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬಂದ ಬೈಕ್ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.

ಗಾಯಗೊಂಡವರು ಶಿರವಾಡದ ನಿವಾಸಿ ಹಾಗೂ ಗೂಡಂಗಡಿ ವ್ಯಾಪಾರಿಯಾಗಿರುವ ಮುಕ್ತದುಬಿ ದಾವುಲಸಾಬ ಚೋಪದಾರ (40) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಅವರು ರಸ್ತೆಗೆ ಬಿದ್ದು ತಲೆಗೆ ಹಾಗೂ ಎಡ ಮೊಣಕಾಲಿಗೆ ಗಂಭೀರ ಗಾಯಗಳಾಗಿವೆ. ಬೈಕ್ ಸವಾರ ಧಾರವಾಡ ಮೂಲದ, ಸದ್ಯ ಹಬ್ಬುವಾಡದಲ್ಲಿ ವಾಸವಾಗಿರುವ ಸುರೇಂದ್ರ ಮುಕೇಶ ಲಮಾಣಿ (19) ಕೂಡ ಕಾಲಿಗೆ ಗಾಯವಾಗಿದೆ.
ಅಪಘಾತದ ಬಳಿಕ ಗಾಯಾಳು ಮಹಿಳೆ ಕೆಲಕಾಲ ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ರಕ್ಷಣೆ ನೀಡಿದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕಾರವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಕಲ್ಗುಟ್ಕರ್ ಗಾಯಾಳುವಿಗೆ ಪ್ರಾಥಮಿಕ ನೆರವು ನೀಡಿ, ಆಂಬುಲೆನ್ಸ್ ಮೂಲಕ ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕಾರವಾರ ನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬೈಕ್ ಸವಾರನ ಅಜಾಗರೂಕ ಹಾಗೂ ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ತಿಳಿದುಬಂದಿದ್ದು, ಸುರೇಂದ್ರ ಮುಕೇಶ ಲಮಾಣಿ ವಿರುದ್ಧ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
