ಉತ್ತರ ಕನ್ನಡ ಜಿಲ್ಲೆಯಲ್ಲಿ ಸತತವಾಗಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಶಿರಸಿ ಮತ್ತು ಸಿದ್ದಾಪುರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 24ರಂದು (ಶುಕ್ರವಾರ) ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ನಿರಂತರ ಮಳೆಯಿಂದಾಗಿ ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನಾನುಕೂಲ ಅಥವಾ ಅನಾಹುತಗಳು ಸಂಭವಿಸಬಾರದು ಎಂಬ ಉದ್ದೇಶದಿಂದ ರಜೆ ನೀಡುವಂತೆ ಕಾರವಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿರಸಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮನವಿ ಮಾಡಿದ್ದರು.
ಈ ಲಿಖಿತ ಕೋರಿಕೆಯನ್ನು ಪರಿಶೀಲಿಸಿದ ಜಿಲ್ಲಾಡಳಿತವು, ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 (ಎಮ್) ಅಡಿಯಲ್ಲಿ ನೀಡಿರುವ ಅಧಿಕಾರವನ್ನು ಬಳಸಿ ಜುಲೈ 24ರಂದು ಮಾತ್ರ ಶಿರಸಿ ಮತ್ತು ಸಿದ್ದಾಪುರ ತಾಲೂಕುಗಳ ವ್ಯಾಪ್ತಿಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ನೀಡಿದೆ.
ಸಂಬಂಧಪಟ್ಟ ಇಲಾಖೆಯ ಉಪನಿರ್ದೇಶಕರು ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಹಾಗೂ ಮಳೆಯಿಂದಾಗಿ ನಷ್ಟವಾಗುವ ಶೈಕ್ಷಣಿಕ ಅವಧಿಯನ್ನು ಮುಂದಿನ ದಿನಗಳಲ್ಲಿ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
