ಸರ್ಕಾರಿ ಆಸ್ಪತ್ರೆಯಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಗರ್ಭಿಣಿಯೊಬ್ಬರು ಬಸ್ ನಿಲ್ದಾಣದಲ್ಲಿ ಕುಸಿದುಬಿದ್ದು ಮೃ*ತಪಟ್ಟ ಘಟನೆ ಶಿರಸಿಯಲ್ಲಿ ಸಂಭವಿಸಿದೆ.
ದಾಸನಕೊಪ್ಪ ರಸ್ತೆಯ ಬಂಕನಾಳ ಕ್ರಾಸ್ ನಿವಾಸಿ ಮಂಗಲಾ ಪಾಂಡ್ರಮೀಸೆ (28) ಮೃ*ತ ಮಹಿಳೆ. ಅನಾರೋಗ್ಯದ ಕಾರಣದಿಂದ ಕಳೆದ ಮೂರು ದಿನಗಳಿಂದ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದರಿಂದ, ವೈದ್ಯರ ಸಲಹೆಯಂತೆ ರವಿವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.
ನಂತರ ಸ್ವಗ್ರಾಮಕ್ಕೆ ತೆರಳಲು ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಮಂಗಲಾ ಅವರು ಏಕಾಏಕಿ ತೀವ್ರ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ತಕ್ಷಣವೇ ಅವರನ್ನು ಸಮೀಪದ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಆಸ್ಪತ್ರೆಯಿಂದ ಬಿಡುಗಡೆಯಾದ ಕೆಲವೇ ಹೊತ್ತಿನಲ್ಲಿ ಈ ದುರಂತ ಸಂಭವಿಸಿರುವುದರಿಂದ ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ನೇರ ಕಾರಣ ಎಂದು ಮೃತರ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಗರ್ಭಿಣಿಯ ನಿಖರ ಸಾವಿನ ಕಾರಣವು ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಸ್ಪಷ್ಟವಾಗಬೇಕಿದೆ.
