ಕಾರವಾರ: ನಗರದ ಬಾಡದ ಪ್ರತಿಷ್ಠಿತ ಶಿವಾಜಿ ಕಲಾ, ವಾಣಿಜ್ಯ ಮತ್ತು ಬಿ.ಸಿ.ಎ. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಅನುರಾಧಾ ನಾಯ್ಕ ಅವರಿಗೆ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಸಹ ಪ್ರಾಧ್ಯಾಪಕ ಹುದ್ದೆಯಿಂದ ಪ್ರೊಫೆಸರ್ ಹುದ್ದೆಗೆ ಪದೋನ್ನತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಅವರ ಸುದೀರ್ಘ ಹಾಗೂ ಅತ್ಯುತ್ತಮ ಸೇವೆಯನ್ನು ಗುರುತಿಸಿ ಸರ್ಕಾರ ಈ ಉನ್ನತ ಗೌರವವನ್ನು ನೀಡಿದೆ.
ಡಾ. ಅನುರಾಧಾ ನಾಯ್ಕ ಅವರ ಈ ಸಾಧನೆ ಮತ್ತು ಸರ್ಕಾರದ ಆದೇಶಕ್ಕೆ ಶಿವಾಜಿ ಮಹಾವಿದ್ಯಾಲಯದ ಉಪನ್ಯಾಸಕರು, ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿ ವರ್ಗದವರು ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ. ಕಾಲೇಜಿನ ಶೈಕ್ಷಣಿಕ ಪ್ರಗತಿಗೆ ನಿರಂತರವಾಗಿ ಶ್ರಮಿಸುತ್ತಿರುವ ಪ್ರಾಂಶುಪಾಲರಿಗೆ ಈ ಉನ್ನತ ಪದೋನ್ನತಿ ಸಂದಿರುವುದು ಇಡೀ ಸಂಸ್ಥೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಕಾಲೇಜಿನ ಸಿಬ್ಬಂದಿ ವರ್ಗದವರು ಹಾಗೂ ನಿವೃತ್ತ ಪ್ರಾಂಶುಪಾಲ ವಿಶ್ವನಾಥ ಎಂ. ನಾಯ್ಕ ಹರ್ಷ ವ್ಯಕ್ತಪಡಿಸಿದ್ದಾರೆ.
