ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಲೇಶ್ವರ ಗ್ರಾಮದಲ್ಲಿ ಭಾರೀ ಗಾಳಿ–ಮಳೆಯ ಅಬ್ಬರಕ್ಕೆ ಬೃಹತ್ ಮರವೊಂದು ಮನೆ ಮೇಲೆ ಉರುಳಿ ಬಿದ್ದು, ಮನೆಗೆ ಭಾರೀ ಹಾನಿಯಾಗಿದೆ. ಅವಘಡ ಸಂಭವಿಸಿದ ವೇಳೆ ಮನೆಯಲ್ಲಿದ್ದವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಲೇಶ್ವರ ಗ್ರಾಮದ ನಿವಾಸಿ ದಯಾನಂದ ಶಂಕರ ಭಂಡಾರಿ ಅವರ ಮನೆ ಮೇಲೆ ಮರ ಬಿದ್ದ ಪರಿಣಾಮ ಮನೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದೆ. ಅಲ್ಲದೆ ಮನೆಯೊಳಗಿದ್ದ ಪೀಠೋಪಕರಣಗಳು ಹಾಗೂ ಇತರೆ ಗೃಹೋಪಯೋಗಿ ವಸ್ತುಗಳಿಗೂ ಹಾನಿಯಾಗಿದೆ.
ಘಟನೆ ಸಂಭವಿಸಿದ ವೇಳೆ ಮನೆಯವರು ಊಟಕ್ಕೆ ಸಿದ್ಧವಾಗುತ್ತಿದ್ದರೆಂದು ತಿಳಿದುಬಂದಿದೆ. ಅವರು ಕುಳಿತಿದ್ದ ಸ್ಥಳದ ಸಮೀಪವೇ ಮನೆಯ ಮೇಲ್ಭಾಗದ ಪಕಾಸಿ ಕಳಚಿ ಬಿದ್ದಿದ್ದು, ಪರಿಸ್ಥಿತಿ ಕೆಲ ಕ್ಷಣಗಳಲ್ಲೇ ಭೀಕರ ರೂಪ ಪಡೆದಿತ್ತು. ಅದೃಷ್ಟವಶಾತ್ ಮನೆಯಲ್ಲಿದ್ದ ಎಲ್ಲರೂ ಸುರಕ್ಷಿತವಾಗಿ ಹೊರಬಂದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಮರ ತೆರವು ಕಾರ್ಯಕ್ಕೆ ಮುಂದಾದರು. ಬಳಿಕ ಕಂದಾಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು. ಸರ್ಕಾರದ ನಿಯಮಾನುಸಾರ ಪರಿಹಾರ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
