ಭಾರೀ ಮಳೆಯ ಪರಿಣಾಮ ಕುಮಟಾ ಪಟ್ಟಣದ ನೆಲ್ಲಿಕೇರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಗುಡ್ಡ ಕುಸಿದು, ಬೃಹತ್ ಕಲ್ಲುಬಂಡೆಯೊಂದು ಶಾಲಾ ಕಟ್ಟಡಕ್ಕೆ ಅಪ್ಪಳಿಸಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನೆ ಸಂಭವಿಸಿದ ಕಟ್ಟಡದ ವರಾಂಡದಲ್ಲೇ ಪ್ರತಿದಿನ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಮಾಡುತ್ತಿದ್ದು, ಬಿಸಿಯೂಟದ ವೇಳೆಗೆ ಮುನ್ನವೇ ಗುಡ್ಡ ಕುಸಿತ ಸಂಭವಿಸಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.

ಧಾರಾಕಾರ ಮಳೆಯಿಂದ ಗುಡ್ಡದ ಮಣ್ಣು ಸಡಿಲಗೊಂಡು ಕುಸಿದಿದ್ದು, ಅದರೊಂದಿಗೆ ಜಾರಿಬಂದ ಬಂಡೆ ಶಾಲೆಯ ಕಟ್ಟಡಕ್ಕೆ ಅಪ್ಪಳಿಸಿ ಅಲ್ಲೇ ನಿಂತಿದೆ. ಘಟನೆ ಬಳಿಕ ಶಿಕ್ಷಕರು ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು.
ಮಾಹಿತಿ ತಿಳಿಯುತ್ತಿದ್ದಂತೆಯೇ ಶಾಸಕ ದಿನಕರ ಶೆಟ್ಟಿ, ತಹಶೀಲ್ದಾರ್ ಶ್ರೀಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಉದಯ ನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ವರ್ಷವೂ ಇದೇ ಪ್ರದೇಶದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದ ಹಿನ್ನೆಲೆ, ಶಾಶ್ವತ ಪರಿಹಾರ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
