ಭಾರೀ ಮಳೆ ಹಾಗೂ ಗಾಳಿಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನಾದ್ಯಂತ ಇರುವ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 24ರಂದು ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಿರುವುದರಿಂದ ಮಲೆನಾಡು ಹಾಗೂ ಅರಣ್ಯ ಪ್ರದೇಶ ಹೆಚ್ಚಾಗಿರುವ ಜೊಯಿಡಾ ತಾಲೂಕಿನಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಆತಂಕ ವ್ಯಕ್ತವಾಗಿತ್ತು. ಮಳೆಯಿಂದಾಗಿ ಯಾವುದೇ ರೀತಿಯ ಅವಘಡಗಳು ಸಂಭವಿಸಬಾರದು ಮತ್ತು ಮಕ್ಕಳಿಗೆ ಓಡಾಟಕ್ಕೆ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಶಿಫಾರಸಿನ ಮೇರೆಗೆ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಸಿಕ್ಕಿರುವ ಅಧಿಕಾರವನ್ನು ಬಳಸಿಕೊಂಡು ಈ ರಜೆ ಆದೇಶ ಹೊರಡಿಸಲಾಗಿದ್ದು, ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಇದು ಅನ್ವಯಿಸಲಿದೆ.
