ಕಾರವಾರ: ತಾಲೂಕಿನ ಸದಾಶಿವಗಡದ ಅಮೃತ ವಿದ್ಯಾಲಯಂ ಶಾಲೆಯ ವಿದ್ಯಾರ್ಥಿಗಳು ಶುಕ್ರವಾರ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನಡೆಸಿದ ವಿಶೇಷ ಮೆರವಣಿಗೆ ಸಾರ್ವಜನಿಕರ ಗಮನ ಸೆಳೆಯಿತು.

ಸದಾಶಿವಗಡದ ಶಾಲೆಯಿಂದ ಆರಂಭವಾದ ಮೆರವಣಿಗೆ ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿತು. ವಿದ್ಯಾರ್ಥಿಗಳು ಶ್ರೀಕೃಷ್ಣ ಹಾಗೂ ರಾಧೆಯ ವೇಷ ಧರಿಸಿ ಸಂಭ್ರಮದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು. ವಿವಿಧ ವೇಷಭೂಷಣಗಳಲ್ಲಿ ಕಂಗೊಳಿಸಿದ ವಿದ್ಯಾರ್ಥಿಗಳು ಜನ್ಮಾಷ್ಟಮಿಯ ಸಂಭ್ರಮಕ್ಕೆ ಮತ್ತಷ್ಟು ಮೆರುಗು ತಂದರು.

ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಸಾಥ್ ನೀಡಿದರು. ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿದ ಮೆರವಣಿಗೆಯನ್ನು ಸಾರ್ವಜನಿಕರು ಕುತೂಹಲದಿಂದ ವೀಕ್ಷಿಸಿದರು.
