ಕಾರವಾರ: ಪ್ರಸಕ್ತ ಸಾಲಿನ ಗಣೇಶ ಚತುರ್ಥಿ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 312 ಹೆಚ್ಚುವರಿ ವಿಶೇಷ ಸಾರಿಗೆ ಬಸ್ಗಳನ್ನು ಆಯೋಜಿಸಲಾಗುತ್ತಿದೆ.
ವಾರಾಂತ್ಯವಾದ ಸೆ.11 ಶನಿವಾರ, ಸೆ.13 ರವಿವಾರ ಹಾಗೂ ಸೆ.14 ಸೋಮವಾರದಂದು ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆಗಳನ್ನು ಆಯೋಜಿಸಲಾಗುವುದು. ಬೆಂಗಳೂರಿನಿಂದ ರಾಜ್ಯ, ಅಂತಾರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ಸೆ.11 ರಿಂದ ಸೆ.13 ವರೆಗೆ ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಹಬ್ಬ ಮುಗಿದ ನಂತರ ಸೆ.14 ಮತ್ತು ನಂತರ ದಿನಗಳಂದು ಪ್ರಮುಖ ಸ್ಥಳಗಳಿಗೆ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ವ್ಯವಸ್ಥೆ ಮಾಡಲಾಗುವುದು. ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಿಸಿದೆ.
